ಯುವಕ ಯುವತಿ ಪ್ರೀತಿಸಿ ಓಡಿ ಹೋಗಿದ್ದಕ್ಕೆ ಯುವಕನ ತಾಯಿಗೆ ಘೋರ ಶಿಕ್ಷೆ ನೀಡಿ ಅಮಾನವೀಯತೆ
ಯುವಕ-ಯುವತಿ ಪ್ರೀತಿಸಿ ಓಡಿ ಹೋಗಿದ್ದಕ್ಕೆ ಆಕ್ರೋಶಗೊಂಡ ಯುವತಿ ಕಡೆಯವರು, ಯುವಕನ ತಾಯಿಯನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ನಡೆದಿದೆ.
ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಅಧಿವೇಶನ ನಡೆಯುತ್ತಿರುವ ಬೆಳಗಾವಿಯಲ್ಲೇ ಅಮಾನುಷ ಹಲ್ಲೆ ಆಗಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಯುವತಿಯ ನಿಶ್ಚಿತಾರ್ಥ ಡಿ. 11ರಂದು ನಿಗದಿ ಆಗಿತ್ತು. ಈಕೆಯನ್ನು ಇದೇ ಗ್ರಾಮದ ಯುವಕ ಪ್ರೀತಿಸುತ್ತಿದ್ದನು. ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು ಬೆಳಗಿನ ಜಾವ ಯುವಕ ತನ್ನ ಪ್ರೇಯಸಿಯನ್ನು ಕರೆದುಕೊಂಡು ಹೋಗಿದ್ದಾನೆ. ಇದರಿಂದ ಆಕ್ರೋಶಗೊಂಡ ಯುವತಿ ಕುಟುಂಬಸ್ಥರು ಯುವಕನ ತಾಯಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಬಳಿಕ ಮೆರವಣಿಗೆ ನಡೆಸಿ ಅಲ್ಲಿಯೇ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. ಮನೆಯನ್ನೂ ಸಂಪೂರ್ಣವಾಗಿ ಧ್ವಂಸಗೊಳಿಸಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಹಾನಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಏಳು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.