ಧಾರವಾಡ: ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಧಾರವಾಡ: ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನ.21ರಂದು ವರದಿಯಾಗಿದೆ.

ಚಿಕ್ಕಮಲ್ಲಿಗವಾಡ ಗ್ರಾಮದ ವಿಠಲ ಶಿಂದೆ(80), ಪುತ್ರ ನಾರಾಯಣ ಶಿಂದೆ(42) ಮೊಮ್ಮಕ್ಕಳಾದ ಶಿವಕುಮಾರ ಶಿಂದೆ(12) ಹಾಗೂ ಶ್ರೀನಿಧಿ ಶಿಂದೆ(11) ಎಂಬವರು ಅದೇ ಗ್ರಾಮದ ದೇವಾಲಯದ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ನಾರಾಯಣ ತನ್ನ ಇಬ್ಬರು ಮಕ್ಕಳು ಹಾಗೂ ತಂದೆಯೊಂದಿಗೆ ಬಾವಿಗೆ ಹಾರಿದ್ದು, ಈ ಘಟನೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳು ಶಾಲಾ ಸಮವಸ್ತ್ರದಲ್ಲೇ ಇದ್ದದ್ದು ಕಂಡು ಬಂದಿದೆ. ಸಾಲಬಾಧೆ ಯಿಂದ ಆತ್ಮಹತ್ಯೆಗೈದಿರುವುದಾಗಿ ಶಂಕೆ ವ್ಯಕ್ತವಾಗಿದೆ. ಸದ್ಯ ನಾಲ್ಕೂ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



