ಜಾನುವಾರು ಅಕ್ರಮ ಸಾಗಾಟ: ಇಬ್ಬರ ಬಂಧನ
ಮೂಡುಬಿದಿರೆ: ಜಾನುವಾರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14ರಂದು ಬೆಳಗ್ಗೆ ಪಿಎಸೈ ಕೃಷ್ಣಪ್ಪ ಮತ್ತು ಸಿಬ್ಬಂದಿ ರೌಂಡ್ಸ್ ನಲ್ಲಿದ್ದಾಗ ಬೆಳುವಾಯಿ ಕಡೆಯಿಂದ ಮಾರ್ನಾಡು ಅಳಿಯೂರು ಕಡೆಗೆ ಕಾರಿನಲ್ಲಿ ಜಾನುವಾರು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಪೊಲೀಸರು ನಿಲ್ಲಿಸಲು ಸೂಚಿಸಿದರು. ಈ ವೇಳೆ ವಾಹನವನ್ನು ನಿಲ್ಲಿಸದೇ ಮುಂದೆ ಸಾಗಿದಾಗ ಪೊಲೀಸರು ಕಾರನ್ನು ಬೆನ್ನಟ್ಟಿದ್ದು, ಈ ಸಂದರ್ಭ ಆರೋಪಿಗಳನ್ನು ಕಾರು ನಿಲ್ಲಿಸಿ ಪರಾರಿಯಾಗುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದು, ಕಾರನ್ನು ಪರಿಶೀಲಿಸಿದಾಗ ದನವನ್ನು ಹಿಂಸಾತ್ಮಕವಾಗಿ ಕಟ್ಟಿರುವುದು ಪತ್ತೆಯಾಗಿದೆ.
ಬಂಧಿತರನ್ನು ಇಮ್ರಾನ್ ಯಾನೆ ಇಬ್ರಾಹೀಂ, ಮುಹಮ್ಮದ್ ಆರಿಫ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಒಂದು ದನ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಮುಹಮ್ಮದ್ ಆರಿಫ್ ವಿರುದ್ಧ ಹಲವು ಠಾಣೆಗಳಲ್ಲಿ ನಾಲ್ಕು ಪ್ರಕರಣ ಹಾಗೂ ಇಮ್ರಾನ್ ಮೇಲೆ ಐದು ಪ್ರಕರಣಗಳು ಈ ಮೊದಲು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




