ಸವಣೂರು: ಮಾಂತೂರಿನಲ್ಲಿ ಅಕ್ರಮ ಗೋವಧೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ, ಮೂವರ ಬಂಧನ
ಪುತ್ತೂರು: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗೋವಧೆ ನಡೆಸುತ್ತಿದ್ದ ತಾಣವೊಂದಕ್ಕೆ ಪೊಲೀಸರು ದಿಢೀರ್ ಧಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮೇ.29ರಂದು ನಡೆದಿದೆ.

ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ಎಂಬಲ್ಲಿನ ತೋಟವೊಂದರಲ್ಲಿ ಯಾವುದೇ ಪರವಾನಗಿ ಇಲ್ಲದೆ, ಕಾನೂನು ಬಾಹಿರವಾಗಿ ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಬೆಳ್ಳಾರೆ ಪೊಲೀಸ್ ಉಪ ನಿರೀಕ್ಷಕರಾದ (PSI) ಸಂತೋಷ್ ಬಿ. ಪಿ. ಅವರಿಗೆ ಲಭಿಸಿತ್ತು.
ಮಾಹಿತಿ ಸಿಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪಿಎಸ್ಐ ಮತ್ತು ಅವರ ಸಿಬ್ಬಂದಿ ತಂಡವು ತಕ್ಷಣವೇ ಮಾಂತೂರು ಮುಂಡತಡ್ಕದ ತೋಟಕ್ಕೆ ಧಾಳಿ ನಡೆಸಿದ್ದಾರೆ. ಈ ವೇಳೆ ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಸ್ಥಳದಲ್ಲಿ ಪತ್ತೆಯಾಗಿದೆ. ತಕ್ಷಣವೇ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಗೋವಧೆ ನಡೆಸುತ್ತಿರುವುದು ದೃಢಪಟ್ಟಿದೆ.
ಬಂಧಿತರನ್ನು ಕೆ. ಅಬ್ದುಲ್ ರಫೀಕ್ (37), ಅದ್ರಾಮ ಮಂತೂರು (41) ಮತ್ತು ಅಬ್ದುಲ್ ಖಾದರ್ ಪಣೆಮಜಲು (57) ಎಂದು ಗುರುತಿಸಲಾಗಿದೆ.
ಪೊಲೀಸ್ ದಾಳಿಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಜಾನುವಾರು ಮಾಂಸ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಇತರ ಸೊತ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 36/2026 ರಂತೆ, ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2023’ ರ ಕಲಂ 4, 7, 12 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.






