ಬಂಟ್ವಾಳ: ಮನೆ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳ ಬಂಧನ; 2.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಬಂಟ್ವಾಳ: ಇಲ್ಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳ್ಪಾಡಿ ಎಂಬಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 2,50,000 ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಬಂಟ್ವಾಳ ಬಾಳ್ತಿಲ ನಿವಾಸಿ ಕುಮಾರಿ ಪೃಥ್ವಿ (18) ಮತ್ತು ಮಂಗಳೂರು ಸುರತ್ಕಲ್ ನಿವಾಸಿ ಕಿಶಾನ್ (22) ಬಂಧಿತ ಆರೋಪಿಗಳು.
ಬೋಳ್ಪಾಡಿಯ ಮನೆಯೊಂದರಲ್ಲಿ ನಡೆದಿದ್ದ ಚಿನ್ನಾಭರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 71/2026 ಕಲಂ: 303(2) ಬಿ ಎನ್ ಎಸ್-2023 ರಂತೆ ಮೊಕದ್ದಮೆ ದಾಖಲಿಸಲಾಗಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 21 ಗ್ರಾಂ ಚಿನ್ನಾಭರಣ (ಮೌಲ್ಯ ರೂ. 2,50,000/-) ಹಾಗೂ 600 ರೂ. ನಗದು ಹಣವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಆರೋಪಿಗಳ ಪತ್ತೆ ಕಾರ್ಯದಲ್ಲಿ ತನಿಖಾಧಿಕಾರಿ ಎ.ಎಸ್.ಐ ನವೀನ್, ಹೆಡ್ ಕಾನ್ಸ್ಟೇಬಲ್ಗಳಾದ ಸುರೇಶ್ ಕುಮಾರ್, ರಾಜೇಶ್, ರಕ್ಷೀತ್, ಕಾನ್ಸ್ಟೇಬಲ್ಗಳಾದ ಬಸವರಾಜ ಕುಡಗುಂಟಿ, ನಾಗನಾಥ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿಗಳಾದ ರೇವತಿ, ಭಾಗ್ಯಮ್ಮ ಮತ್ತು ಮಾಲಾಶ್ರೀ ಪಾಲ್ಗೊಂಡಿದ್ದರು.
ಆರೋಪಿಗಳ ಪತ್ತೆ ಹಚ್ಚುವ ತಾಂತ್ರಿಕ ಕಾರ್ಯದಲ್ಲಿ ಜಿಲ್ಲಾ ಬೆರಳಚ್ಚು ಘಟಕದ ಸಚಿನ್ ಮತ್ತು ಉದಯ್ ಹಾಗೂ ಜಿಲ್ಲಾ ಗಣಕಯಂತ್ರ ವಿಭಾಗದ ದಿವಾಕರ ಮತ್ತು ಸಂಪತ್ ಸಹಕರಿಸಿದ್ದಾರೆ. ಇಲಾಖೆಯ ಈ ಯಶಸ್ವಿ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.






