ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಮೇಲೆ ಹಲ್ಲೆ!
ಜೈಪುರ: ರಾಜಸ್ಥಾನದ ಜೈಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದಿಪ್ಕೆ ಮೇಲೆ ಹಲ್ಲೆ ನಡೆದ ದೃಶ್ಯ ವೈರಲ್ ಆಗಿದೆ.

ಸೋಮವಾರ ಮಧ್ಯಾಹ್ನ ಶಾಂತಿಯುತ ಪ್ರತಿಭಟನೆ ನಡೆಸಲು ಅಭಿಜಿತ್ ದಿಪ್ಕೆ ಕರೆ ನೀಡಿದ್ದರು. ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಬೆಂಬಲಿಗರ ಹೆಗಲ ಮೇಲೆ ನಿಂತು ಜನರನ್ನುದ್ದೇಶಿಸಿ ಮಾತನಾಡಲು ತೆರಳುತ್ತಿದ್ದ ವೇಳೆ ಕೆಲವರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಇಬ್ಬರು ವ್ಯಕ್ತಿಗಳು ಅವರನ್ನು ಎಳೆದು, ಕಪಾಳಮೋಕ್ಷ ಮಾಡಿದ್ದು, ಕೆಳಕ್ಕೆ ಎಳೆಯಲು ಯತ್ನಿಸಿದ್ದಾರೆ. ಈ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಅಭಿಜಿತ್ ದಿಪ್ಕೆ ಆಗ್ರಹಿಸಿದ್ದಾರೆ. ಈ ಹೋರಾಟ ಯುವಕರ ಧ್ವನಿಯಾಗಿದೆ ಎಂದು ಅವರು ಹೇಳಿದ್ದಾರೆ.
ಹಲ್ಲೆ ಬಳಿಕ ಎಕ್ಸ್ನಲ್ಲಿ(X) ಪ್ರತಿಕ್ರಿಯಿಸಿರುವ ಅಭಿಜಿತ್ ದಿಪ್ಕೆ, ದೈಹಿಕ ಹಲ್ಲೆಗಳು ಭಯ ಮತ್ತು ಹೇಡಿತನದ ಸಂಕೇತ. ನಾವು ಶಾಂತಿಯುತವಾಗಿ ನಮ್ಮ ಧ್ವನಿಯನ್ನು ಎತ್ತುತ್ತಲೇ ಇರುತ್ತೇವೆ ಎಂದು ತಿಳಿಸಿದ್ದಾರೆ.




