ವಿಟ್ಲ: ಅಕ್ರಮ ಗಣಿಗಾರಿಕೆ ಸ್ಥಳಕ್ಕೆ ಪೊಲೀಸ್ ದಾಳಿ
ವಿಟ್ಲ: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ಅಡ್ಡೆಯ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ.

ಜು.2ರಂದು ಸಂಜೆ ವಿಟ್ಲ ಉಪನಿರೀಕ್ಷಕ ರಾಮಕೃಷ್ಣ ಮತ್ತು ಸಿಬ್ಬಂದಿ ದಾಳಿ ನಡೆಸಿದಾಗ, ಪೊಲೀಸರನ್ನು ಕಂಡು ಆರೋಪಿಗಳು ಓಡಿಹೋಗಿದ್ದಾರೆ. ಸ್ಥಳದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ಸೇರಿ, ಲಾರಿಗಳ ತೂಕ ಮಾಡಲು ಅನಧಿಕೃತವಾಗಿ ನಿರ್ಮಿಸಲಾಗಿದ್ದ ವೇ ಬ್ರಿಡ್ಜ್ ಮತ್ತು ಕಟ್ಟಡ ಪತ್ತೆಯಾಗಿದೆ. ಕೃತ್ಯಕ್ಕೆ ಬಳಸಿದ ವಾಹನ ಹಾಗೂ ಯಂತ್ರೋಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಯಾವುದೇ ಪರವಾನಗಿ ಇಲ್ಲದೆ ದಂಧೆ ನಡೆಸುತ್ತಿದ್ದ ಆರೋಪಿ ಮುಳಿಗದ್ದೆ ಝಕಾರಿಯಾ ಮತ್ತು ಇತರರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.





