ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ
ವಿಟ್ಲ: ಕಾರಿನಲ್ಲಿ ಗಾಂಜಾ ತಂದು ಸೇವಿಸಿದ ಆರೋಪದ ಮೇರೆಗೆ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಗಸ್ಟ್ 9ರಂದು ಸಂಜೆ ಬಂಟ್ವಾಳ ತಾಲೂಕಿನ ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕದಲ್ಲಿ ಕಾರೊಂದು ಅನುಮಾನಾಸ್ಪದವಾಗಿ ನಿಂತಿರುವ ಬಗ್ಗೆ ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ನಾಗರಾಜ ಕೆ (32) ಎಂಬವರ ಮನೆಯ ಅಂಗಳದಲ್ಲಿ ಕಾರು ಪತ್ತೆಯಾಗಿದೆ.
ಸ್ಥಳದಲ್ಲಿದ್ದ ನಾಲ್ವರನ್ನು ವಿಚಾರಣೆ ನಡೆಸಿದಾಗ ಮನೆ ಮಾಲೀಕ ನಾಗರಾಜ ಕೆ, ಕೊಳ್ನಾಡು ನಿವಾಸಿ ಕುಮಾರ್ ಕೃಷ್ಣ (27), ಕೇಪು ನಿವಾಸಿ ಅಬ್ದುಲ್ ಜಲೀಲ್ (40) ಹಾಗೂ ವಿಟ್ಲ ಕಸಬಾ ನಿವಾಸಿ ಅಬ್ದುಲ್ ಖಾದರ್ ಯು (31) ಎಂದು ತಿಳಿದುಬಂದಿದೆ.
ವಿಚಾರಣೆ ವೇಳೆ ಆರೋಪಿಗಳು ಕಾರಿನಲ್ಲಿ ಗಾಂಜಾ ತಂದು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಬಳಿಕ ನಾಲ್ವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 173/2026ರಂತೆ ಎನ್ಡಿಪಿಎಸ್ ಕಾಯ್ದೆ 1985ರ ಕಲಂ 27(b) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.



