ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗುವಿನ ರಕ್ಷಣೆ
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ ನನ್ನು ಸತತ ಕಾರ್ಯಾಚರಣೆಯ ಬಳಿಕ ಕೊನೆಗೂ ರಕ್ಷಣೆ ಮಾಡಲಾಗಿದೆ.

ಸತತ 18 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯ ಬಳಿಕ ಸಾತ್ವಿಕ್ನನ್ನು ಜೀವಂತವಾಗಿ ಹೊರ ತೆಗೆಯುವಲ್ಲಿ ರಕ್ಷಣಾ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದ್ದಾರೆ. ನಿರಂತರ ಕಾರ್ಯಾಚರಣೆ ನಡೆಸಿ ಮಗು ಸಾತ್ವಿಕ್ನನ್ನು ರಕ್ಷಿಸಿದ ಸಿಬ್ಬಂದಿಯ ಬಗ್ಗೆ ಭಾರಿ ಶ್ಲಾಘನೆ ವ್ಯಕ್ತವಾಗುತ್ತಿದೆ. ಸಾತ್ವಿಕ್ನನ್ನು ತಕ್ಷಣವೇ ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಗುವಿನ ರಕ್ಷಣೆಯಿಂದಾಗಿ ಪೋಷಕರಾದ ಸತೀಶ್ ಮತ್ತು ಪೂಜಾ ದಂಪತಿ ಹಾಗೂ ಸ್ಥಳೀಯರು ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ.