ಕರಾವಳಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಪ್ರಕರಣ ದಾಖಲು



ಬೆಳ್ತಂಗಡಿ: ಪೊಲೀಸರು ಕಲ್ಲಿನ ಕೋರೆಗೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ ನಂತರ ಠಾಣೆಗೆ ಬಂದು ಆರೋಪಿಯ ಬಿಡುಗಡೆ ಮಾಡಲು ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾಗ ಪಿಎಸ್ಐ ಗೆ ಶಾಸಕರು ಬೆದರಿಕೆ ಹಾಕಿ ನಿಂದನೆ ಮಾಡಿರುವ ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೆ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮೇಲಂತಬೆಟ್ಟಿನಲ್ಲಿ ಅಕ್ರಮ ಕಲ್ಲಿನ ಕೊರೆ ಮೇಲೆ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಬೆಳ್ತಂಗಡಿ ಪೊಲೀಸರು ಮೇ.18 ರಂದು ದಾಳಿ ಮಾಡಿದ್ದರು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಮೋದ್ ಗೌಡ ಮತ್ತು ಶಶಿರಾಜ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣ ಸಂಬಂಧ ಶಶಿರಾಜ್ ಶೆಟ್ಟಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು ಈ ವೇಳೆ ರಾತ್ರೋರಾತ್ರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಯೊಳಗೆ ನುಗ್ಗಿ ಪ್ರತಿಭಟನೆ ನಡೆಸಿ ಶಶಿರಾಜ್ ಬಿಡುಗಡೆ ಮಾಡಲು ಪಟ್ಟು ಹಿಡಿದಿದ್ದರು ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ಪೊಲೀಸರಿಗೆ ನಿಂದನೆ ಮಾಡಿರುವ ವಿಡಿಯೋ ವೈರಲ್ ಆಗಿತ್ತು.

ಬೆಳ್ತಂಗಡಿ ವಿಧಾನಸಭಾ ಶಾಸಕರಾದ ಹರೀಶ್ ಪೂಂಜಾರವರು, ಇತರ ಕೆಲವು ಜನರೊಂದಿಗೆ, ದಿನಾಂಕ ಮೇ.18 ರಂದು ರಾತ್ರಿ, ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿ, ಆರೋಪಿಯು ಶಾಸಕರ ಪಕ್ಷದ ಕಾರ್ಯಕರ್ತನಾಗಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವ್ಯಾಚವಾಗಿ ಬೈದು ಬೆದರಿಸಿರುತ್ತಾರೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ಇಲಾಖೆಯ ಬಗ್ಗೆ ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ, ದುರ್ವರ್ತನೆ ತೋರಿರುವ ಬಗ್ಗೆ ಹರೀಶ್ ಪೂಂಜಾರವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ. 57/2024 , ಕಲಂ:353, 504 IPC ರಂತೆ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!