ಕರಾವಳಿರಾಜಕೀಯ

ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಎಂ.ಎಸ್ ಮಹಮ್ಮದ್ ನೇಮಕಕ್ಕೆ  ಆಗ್ರಹ



ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಸ್ತುತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ಎಸ್ ಮಹಮ್ಮದ್ ಅವರನ್ನು ನೇಮಕ ಮಾಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭವಾಗಿದೆ.

ಹಲವಾರು ವರ್ಷಗಳಿಂದ ಪಕ್ಷಕ್ಕೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಾ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವ ಎಂಎಸ್ ಮಹಮ್ಮದ್ ಅವರು ಎಲ್ಲಾ ವಿಧದಲ್ಲೂ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯಾಗಿದ್ದಾರೆ. ಅವರಿಗೆ ಜಿಲ್ಲಾಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸುವ ಎಲ್ಲ ಶಕ್ತಿ ಸಾಮರ್ಥ್ಯ ಇದೆ. ಮಾತ್ರವಲ್ಲದೆ ಅಲ್ಪಸಂಖ್ಯಾತ ಸಮುದಾಯ ಕೂಡ ಕಾಂಗ್ರೆಸ್ಸನ್ನು ಬೆಂಬಲಿಸುತ್ತಾ ಬಂದಿದೆ. ಹಾಗಾಗಿ ಎಂ.ಎಸ್ ಮಹಮ್ಮದ್ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಎಂ.ಎಸ್ ಮಹಮ್ಮದ್ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಅಭಿಯಾನ ಶುರು ಮಾಡಿದ್ದಾರೆ.

ತಮ್ಮ ಸುಧೀರ್ಘ ರಾಜಕೀಯ ಜೀವನದಲ್ಲಿ ಪಕ್ಷಕ್ಕೆ ವಿರುದ್ಧವಾಗುವಂತಹ ಅಥವಾ ಪಕ್ಷದಿಂದ ತಟಸ್ಥರಾಗುವಂತಹ ಯಾವುದೇ ಕಾರ್ಯವನ್ನು ಮಾಡದೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೇ ಈಗಲೂ ಪಕ್ಷಕ್ಕಾಗಿ ರಾತ್ರಿ ಹಗಲು ದುಡಿಯುತ್ತಿರುವ ಎಂ.ಎಸ್ ಮಹಮ್ಮದ್ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ನೀಡುವ ಮೂಲಕ ಪಕ್ಷದ ಹೈಕಮಾಂಡ್ ಸರಿಯಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿಂದೆ ಎಂ ಎಸ್ ಅವರನ್ನು ಎಂಎಲ್ಸಿ ಮಾಡಬೇಕೆಂದು ಅವರ ಅಭಿಮಾನಿಗಳು, ಕಾರ್ಯಕರ್ತರು ಸಾಮಾಜಿಕ ಜಾಲತಾಣದ ಮೂಲಕ ಅಭಿಯಾನ ಪ್ರಾರಂಭಿಸಿದ್ದಲ್ಲದೇ ಪಕ್ಷದ ಸಂಬಂಧಪಟ್ಟವರಿಗೆ ಮನವಿಯನ್ನು ಸಲ್ಲಿಸಿದ್ದರು. ಇದೀಗ ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ಮಾಡಬೇಕೆಂಬ ಆಗ್ರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭಿಸಿದ್ದಾರೆ.

ಅಲ್ಲದೆ ಪ್ರಸ್ತುತ ಜಿಲ್ಲಾಧ್ಯಕ್ಷರಾಗಿರುವ ಹರೀಶ್ ಕುಮಾರ್ ಅವರನ್ನು ಬದಲಾವಣೆ ಮಾಡಬೇಕೆಂದೂ ಸಾಮಾಜಿಕ ಜಾಲತಾಣದಲ್ಲಿ ಹಲವರು ಆಗ್ರಹಿಸಿದ್ದು ಜಿಲ್ಲೆಯಲ್ಲಿ ಪಕ್ಷದ ಸತತವಾಗಿ ಸೋಲುತ್ತಿರುವುದರಿಂದ ಕಳಪೆ ನಿರ್ವಹಣೆ ಆಧರಿಸಿ ಬದಲಾವಣೆ ಅಗತ್ಯವಿದೆಯೆಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!