ಸಚಿವ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಲಿ: ಹೆಚ್.ಡಿ.ಕೆ ಆಗ್ರಹ
‘
ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರ ಸಾವಿನ ಪ್ರಕರಣಕ್ಕೆ ನೈತಿಕ ಹೊಣೆ ಹೊತ್ತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕೋಲಾರದಲ್ಲಿ ಜಾತ್ಯತೀತ ಜನತಾದಳ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಮಾವೇಶ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಇಬ್ಬರು ರೋಗಿಗಳ ಸಾವಿನ ಬಗ್ಗೆ ಸರಕಾರವು ವಾಸ್ತವಾಂಶಗಳನ್ನು ಸ್ಪಷ್ಟಪಡಿಸಿಲ್ಲ. ನೈತಿಕತೆ ಇದ್ದಿದ್ದರೆ ಆರೋಗ್ಯ ಸಚಿವರು ಬಳ್ಳಾರಿಯ ಆಸ್ಪತ್ರೆಗೆ ಮೊದಲು ಹೋಗಬೇಕಿತ್ತು. ಅವರು ಬೆಂಗಳೂರಿನಲ್ಲಿ ಇದ್ದುಕೊಂಡೇ ಮಾತನಾಡುತ್ತಿದ್ದರು ಎಂದವರು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದ ಆರೋಗ್ಯ ಸ್ಥಿತಿ ಯಾವ ಮಟ್ಟಕ್ಕೆ ಹೋಗಿದೆ ಎನ್ನುವುದಕ್ಕೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಕರ್ಮಕಾಂಡವೇ ಸಾಕ್ಷಿ. ಯಾವ ನಂಬಿಕೆ ಮೇಲೆ ಜನರು ಸರಕಾರದ ಆಸ್ಪತ್ರೆಗೆ ರೋಗಿಗಳು ಬರಬೇಕು? ಘಟನೆ ಸಂಭವಿಸಿ ಇಷ್ಟು ದಿನವಾದರೂ ಸತ್ಯಾಂಶ ಇಲ್ಲಿವರೆಗೂ ಹೊರಬಂದಿಲ್ಲ. ಸರಕಾರದ ಆಡಳಿತದ ವೈಖರಿಯೇ ಇದಕ್ಕೆ ಕಾರಣ. ಆರೋಗ್ಯ ಸಚಿವರು ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.