ಶಿಗ್ಗಾಂವಿ ಉಪಚುನಾವಣೆ: ಕಾಂಗ್ರೆಸ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್
ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಿ ಎಐಸಿಸಿ ಆದೇಶ ಹೊರಡಿಸಿದೆ.

ಹಾನಗಲ್ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್ ಅಹ್ಮದ್ ಖಾನ್ ಪಠಾಣ್ , ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ವಿರುದ್ಧ ಸೋಲುಕಂಡಿದ್ದರು. ಇದೀಗ ಉಪಚುನಾವಣೆಗೂ ಕೂಡಾ ಕಾಂಗ್ರೆಸ್, ಹೈಕಮಾಂಡ್ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರನ್ನೇ ಮತ್ತೊಮ್ಮೆ ಕಣಕ್ಕಿಳಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಅವರು ಇಂದು ಅಧಿಕೃತ ಆದೇಶ ಹೊರಡಿಸಿದ್ದಾರೆ. ಕಳೆದ ಐದು ಚುನಾವಣೆಗಳಲ್ಲೂ ಸಹ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲಾಗಿದ್ದು, ಈ ಬಾರಿ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಕೂಗು ಕೇಳಿ ಬಂದಿತ್ತು. ಆದರೆ ಮತ್ತೊಮ್ಮೆ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಮಣೆ ಹಾಕಿದೆ.