ಬಿಜೆಪಿ ಸರ್ಕಾರದ ಲಂಚಗುಳಿತನದ ಬಗ್ಗೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ಬಂಧಿಸಿ- ಸಿದ್ದರಾಮಯ್ಯ
ಬೆಂಗಳೂರು: ವಿಧಾನಮಂಡಲ ಕಲಾಪ ನಡೆಯುತ್ತಿರುವಾಗಲೇ ‘ಪೇಸಿಎಂ– ಇಲ್ಲಿ ಶೇ 40 ಸ್ವೀಕರಿಸಲಾಗುವುದು’ ಎಂಬ ಶೀರ್ಷಿಕೆಯಡಿ ಕಾಂಗ್ರೆಸ್ ಆರಂಭಿಸಿರುವ ಅಭಿಯಾನ ದೊಡ್ಡ ಸದ್ದು ಮಾಡುತ್ತಿದೆ.
ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ‘ಶೇ 40ರಷ್ಟು ಕಮಿಷನ್’ ಸರ್ಕಾರ ಎಂಬ ಅಭಿಯಾನವನ್ನು ಕಾಂಗ್ರೆಸ್ ನಡೆಸುತ್ತಿದೆ. ಅದರ ಮುಂದುವರಿದ ಭಾಗವಾಗಿ ಈ ಅಭಿಯಾನ ನಡೆದಿದೆ. ಬೆಂಗಳೂರಿನ ಪ್ರಮುಖ ಪ್ರದೇಶಗಳ ಗೋಡೆಗಳ ಮೇಲೆಲ್ಲ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಹೋಲುವ ಚಿತ್ರದ ಕ್ಯೂಆರ್ ಕೋಡ್ ಸಹಿತ ‘ಪೇಸಿಎಂ’ ಎಂದು ಬರೆದ ಭಿತ್ತಿಪತ್ರಗಳು ರಾರಾಜಿಸುತ್ತಿದ್ದವು. ಅದರ ಜತೆಗೆ ಮೊಬೈಲ್ ಸಂಖ್ಯೆಯನ್ನೂ ನೀಡಲಾಗಿತ್ತು.
‘ಪೇಸಿಎಂ’ ಅಭಿಯಾನ ಕುರಿತು ಸರಣಿ ಟ್ವೀಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ. ಬಿಜೆಪಿಗರೇ, ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ ? ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ, ಎಚ್ಚರ..! ಎಂದು ವಾಗ್ದಾಳಿ ನಡೆಸಿದ್ದಾರೆ.
‘ರಾಜ್ಯ ಬಿಜೆಪಿ ಸರ್ಕಾರದ ಲಂಚಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ. ನನ್ನ ಮತ್ತು ಡಿ.ಕೆ.ಶಿವಕುಮಾರ್ ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ, ಅದರ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.