ನೆರೆ ರಾಜ್ಯಗಳಲ್ಲಿ ತೀವ್ರಗೊಂಡ ಹಕ್ಕಿಜ್ವರ, ರಾಜ್ಯದಲ್ಲೂ ಆತಂಕ

ಬೆಂಗಳೂರು: ನೆರೆಯ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿಜ್ವರ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ . ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ನಿಂದ ಉಂಟಾಗುವ ಸೋಂಕಿನಿಂದ ಕೋಳಿಗಳು ಮೃತಪಡುತ್ತಿವೆ.
ಪರಿಣಾಮವಾಗಿ ಕರ್ನಾಟಕದ ಗಡಿ ಭಾಗಗಳಲ್ಲಿ ಆತಂಕ ಉಂಟಾಗಿದೆ. ತೆಲಂಗಾಣ, ಆಂಧ್ರ ಪ್ರದೇಶಗಳಲ್ಲಿ ಕೋಳಿಗಳ ಮಾರಣಹೋಮವೇ ನಡೆಯುತ್ತಿದೆ. ಸಂಯುಕ್ತ ನೆಲ್ಲೂರು ಜಿಲ್ಲೆಯ ಗುಡೂರು, ಸುಳ್ಳೂರುಪೇಟ, ನಾಯ್ಡುಪೇಟ ಮತ್ತು ವೆಂಕಟಗಿರಿ ಪ್ರದೇಶಗಳಲ್ಲಿ ಚಿಕನ್ ಶಾಪ್ಗಳಲ್ಲಿ ನೂರಾರು ಕೋಳಿಗಳು ಸಾಯುತ್ತಿವೆ. ಕೋಳಿ ಖರೀದಿಗೆ ಜನ ಹಿಂದೇಟು ಹಾಕುತ್ತಿದ್ದು, ಚಿಕನ್ ಶಾಪ್ ಮಾಲೀಕರು ಅಂಗಡಿಗಳನ್ನು ಬಂದ್ ಮಾಡುತ್ತಿದ್ದಾರೆ.