ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ವಿಚಾರ: ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಸರಕಾರಿ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರ ಜೊತೆ ಚರ್ಚೆ ನಡೆಸಿದ್ದಾರೆ.

ಪುತ್ತೂರಿಗೆ ಈ ಬಾರಿಯ ಬಜೆಟ್ನಲ್ಲಿ ಮೆಡಿಕಲ್ ಕಾಲೇಜು ಮಂಜೂರುಗೊಂಡಿತ್ತು. ಇದಾದ ಬಳಿಕ ಬನ್ನೂರಿನಲ್ಲಿ ಕಾಯ್ದಿರಿಸಿದ 40 ಎಕ್ರೆ ಜಾಗಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಉನ್ನತ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ಸರಕಾರಕ್ಕೆ ವರದಿಯನ್ನು ಸಲ್ಲಿಸಲಾಗಿದೆ. ಇದಾದ ಬಳಿಕ ಎ.3ರಂದು ಶಾಸಕರು ಬೆಂಗಳೂರಿನಲ್ಲಿ ಸಚಿವರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

300 ಕೋಟಿ ರೂ ಅನುದಾನ ಬಿಡುಗಡೆಗೆ ಮನವಿ:
ವೈದ್ಯಕೀಯ ಸಚಿವ ಶರಣಪ್ರಕಾಶ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಗಿ ಮಾತುಕತೆ ನಡೆಸಿದ ಶಾಸಕರು ಮೆಡಿಕಲ್ ಕಾಲೇಜು ನಿರ್ಮಾಣ ವಿಚಾರಕ್ಕೆ ಸಂಬಂದಿಸಿದಂತೆ ಪ್ರಾರಂಭಿಕ 300 ಕೋಟಿ ರೂ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಪ್ರಾರಂಭಿಕವಾಗಿ 400 ಬೆಡ್ನ ಆಸ್ಪತ್ರೆಯ ನಿರ್ಮಾಣವಾಗಬೇಕಿದೆ. ಆಸ್ಪತ್ರೆ ನಿರ್ಮಾಣವಾದ ಬಳಿಕ ಮೆಡಿಕಲ್ ಕಾಲೇಜು ಪ್ರಕ್ರಿಯೆ ಆರಂಭವಾಗಲಿದ್ದು ಆಸ್ಪತ್ರೆ ನಿರ್ಮಾಣಕ್ಕೆ 300 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಭರವಸೆಯನ್ನು ನೀಡಲಾಗಿದೆ.