ನಿದ್ದೆ ಮಾತ್ರೆ ಸೇವಿಸಿ ತಾಯಿ ಮೃತ್ಯು, ಮಗನ ಸ್ಥಿತಿ ಗಂಭೀರ
ಬೆಳ್ತಂಗಡಿ: ಅತಿಯಾದ ನಿದ್ದೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಕೊನೆಯುಸಿರೆಳೆದು ಮಗನ ಸ್ಥಿತಿ ಗಂಭೀರ ಸ್ಥಿತಿಯಲ್ಲಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ವರದಿಯಾಗಿದೆ.
ಮೃತರು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞಿರಾಮನ್ ನಾಯರ್ ಅವರ ಪುತ್ನಿ ಕಲ್ಯಾಣಿ(96) ಎಂಬವರಾಗಿದ್ದಾರೆ. ಅವರ ಪುತ್ರ, ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ ಕೆ (58) ಅವರು ಗಂಭೀರಾವಸ್ಥೆಯಲ್ಲಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಕಲ್ಯಾಣಿ ಮತ್ತು ಜಯರಾಂ ಕೆ ಅವರು ಕೂಳೂರು ಮನೆಯಲ್ಲಿ ಮೇ. 10 ರಂದು ಬೆಳಗ್ಗೆ ಜಯರಾಂ ಅವರ ಮನೆಯ ಬಳಿಯಿಂದ ಯಾವುದೇ ಶಬ್ದ ಕೇಳದೆ ಇದ್ದುದರಿಂದ ನೆರೆ ಹೊರೆ ಯವರು ಬಂದು ನೋಡಿದಾಗ ತಾಯಿ ಮತ್ತು ಮಗ ಮನೆಯೊಳಗೆ ದೇವರ ಕೋಣೆಯ ಎದುರು ಜೊತೆಯಾಗಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಳಿಕ ಊರವರ ಸಹಕಾರದೊಂದಿಗೆ ಮನೆಯ ಬಾಗಿಲು ತೆಗೆದು ಒಳ ಪ್ರವೇಶಿಸಿದಾಗ ಇಬ್ಬರೂ ಉಸಿರಾಡುತ್ತಿದ್ದರು. ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಆರಂಭಿಸಲಾಯಿತು. ಮೂರು ದಿನಗಳವರೆಗೂ ತೀವ್ರ ನಿಗಾ ಘಟಕದಲ್ಲಿದ್ದ ಅವರ ಪೈಕಿ ತಾಯಿ ಕಲ್ಯಾಣಿ ಅವರು ಮೇ.12 ರಂದು ಕೊನೆಯುಸಿರೆಳೆದಿದ್ದಾರೆ. ಮಗ ಜಯರಾಂ ಕೆ ಅವರು ಆರೋಗ್ಯ ಸ್ಥಿತಿ ಇನ್ನಷ್ಟು ಬಿಗಡಾಯಿಸಿದ್ದು ಅವರನ್ನು ಮಂಗಳೂರಿಗೆ ಸಾಗಿಸಲಾಗಿದೆ.
ತೀರಾ ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗಿಪ್ಸೆ ಹೊಂದಿ ತಾಯಿ, ಮಗ, ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ತಾಯಿ ಮಲಗಿದ ಜಾಗದಲ್ಲಿ ಜಯರಾಂ ಕೆ ಅವರು ಬರೆದಿರುವ ನಾಲ್ಕು ಪುಟಗಳ ಮರಣೋತ್ತರ ಪತ್ರ ಲಭಿಸಿದ್ದು ಅದರಲ್ಲಿ ಸಾಲದ ಸಮಸ್ಯೆ, ತನ್ನ ಅನಾರೋಗ್ಯದ ಕಾರಣದಿಂದ ನಾವೇ ನಿದ್ದೆ ಮಾತ್ರೆ ಸೇವಿಸಿರುತ್ತೇವೆ. ನಮ್ಮನ್ನು ಬದುಕಿಸುವ ಪ್ರಯತ್ನ ಮಾಡಬೇಡಿ ಎಂದು ಬರೆಯಲಾಗಿದೆ.
ತಾಯಿ ಕಳೆದ ನಾಲ್ಕು ವರ್ಷಗಳಿಂದ ವಯೋ ಸಹಜ ಅನಾರೋಗ್ಯದಿಂದ ಮಲಗಿದಲ್ಲೇ ಇದ್ದು ಅವರ ಆರೈಕೆಯನ್ನು ಮಗನೇ ಮಾಡುತ್ತಿದ್ದರು. ಆದ್ದರಿಂದ ನಾನು ಸತ್ತರೆ ಅಮ್ಮನನ್ನು ನೋಡಿಕೊಳ್ಳುವವರು ಯಾರು ಎಂಬ ಕಾರಣಕ್ಕೆ ನಾವಿಬ್ಬರೂ ಜೊತೆಯಾಗಿ ಸಾಯುತ್ತಿದ್ದೇವೆ ಎಂದು ಬರೆದಿದ್ದಾರೆ.
ಇದರಲ್ಲಿ ತಾಯಿಗೆ ಅವರು ಮೊದಲು ಮಾತ್ರೆ ಕುಡಿಸಿ ಬಳಿಕ ಅವರು ಸೇವಿಸಿದರೇ ಅಥವಾ ಇಬ್ಬರೂ ನಿರ್ಧಾರಕ್ಕೆ ಬಂದು ಒಟ್ಟಿಗೇ ಸೇವಿಸಿದರೆ ಎಂಬುದು ತಿಳಿದು ಬಂದಿಲ್ಲ.
ಮೃತ ಕಲ್ಯಾಣಿ ಅವರು ಕಲಾಪ್ರೇಮಿಯಾಗಿದ್ದು ಸಾಮಾಜಿಕವಾಗಿ ಎಲ್ಲರ ಜೊತೆ ಬೆರೆಯುತ್ತಿದ್ದರು. ಜಯರಾಂ ಕೆ ಅವರು ಕಲಾವಿದರಾಗಿ, ನಾಟಕ ರಚನೆಕಾರರಾಗಿ, ಜಾನಪದ ಕಲಾರಾಧಕರಾಗಿ, ಚಿತ್ರಕಲಾ ಶಿಕ್ಷಕರಾಗಿ, ರಾಜ್ಯಮಟ್ಟದ ಹಲವು ಪ್ರಶಸ್ತಿ ಪಡೆದುಕೊಂಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.