ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ವೀಸಾ ನೀಡುವುದಾಗಿ ವಂಚಿಸಿದ ಆರೋಪಿಗಳಿಬ್ಬರ ಸೆರೆ
ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸಿದ ಆರೋಪಿತರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ಮಂಗಳೂರಿನ ಬೆಂದೂರ್ ವೆಲ್ ಎಂಬಲ್ಲಿ Hireglow Elegant Overseas International (Opc) Private Limited ಎಂಬ ಕಚೇರಿ ತೆರೆದು, ಪತ್ರಿಕೆಯಲ್ಲಿ ಜಾಹೀರಾತನ್ನು ನೀಡಿ ಉದ್ಯೋಗಾಕಾಂಕ್ಷಿಗಳಿಗೆ ನಂಬಿಕೆ ಬರುವ ಹಾಗೇ ನಂಬಿಸಿ ಅವರಿಂದ ಲಕ್ಷಾಂತರ ಹಣವನ್ನು ಪಡೆದುಕೊಂಡು ವೀಸಾ ನೀಡದೇ ಸುಮಾರು 289 ಜನರಿಗೆ ಸುಮಾರು 4 ಕೋಟಿ 50 ಲಕ್ಷ ರೂಪಾಯಿ ವಂಚನೆ ಮಾಡಿದ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಮಸೀವುಲ್ಲಾ ಖಾನ್ ಎಂಬ ಮುಂಬೈ ಮೂಲದ ಆರೋಪಿಯನ್ನು ಬಂಧಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ. ತನಿಖೆಯನ್ನು ಮುಂದುವರೆಸಿ ಪ್ರಕರಣದ ಪ್ರಮುಖ ಆರೋಪಿಗಳಾದ
ಮುಂಬೈಯ ದಿಲ್ ಶಾದ್ ಅಬ್ದುಲ್ ಸತ್ತಾರ್ ಖಾನ್ (45)
ಹಾಗೂ ಸಾಹುಕಾರಿ ಕಿಶೋರ್ ಕುಮಾರ್ @ ಅನಿಲ್ ಪಾಟೀಲ್ (34) ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಪ್ರಕರಣದ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.