ಉದ್ಯಮ ಕ್ಷೇತ್ರದ ದಿಗ್ಗಜ “ಅನಿವಾಸಿ ಕನ್ನಡಿಗ” ಝಕರಿಯಾ ಜೋಕಟ್ಟೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಮಂಗಳೂರು: 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಅಧಿಕೃತ ಪಟ್ಟಿ ಪ್ರಕಟಗೊಂಡಿದ್ದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

“ಅನಿವಾಸಿ ಕನ್ನಡಿಗ” ವಿಭಾಗದಲ್ಲಿ ಸೌದಿ ಅರೇಬಿಯಾ ಜುಬೈಲ್ ನ ಅಲ್ ಮುಝೈನ್ ಕಂಪೆನಿ ಸಂಸ್ಥಾಪಕ ಝಕರಿಯಾ ಜೋಕಟ್ಟೆ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬಡ ಕುಟುಂಬದಿಂದ ಬಂದು ತನ್ನ ಕಠಿಣ ಮತ್ತು ನಿರಂತರ ಪರಿಶ್ರಮದ ಮೂಲಕ ಹಂತ ಹಂತವಾಗಿ ಸಾಧನೆಯ ಶಿಖರವೇರಿದ ಝಕರಿಯಾ ಜೋಕಟ್ಟೆ ಅವರು ಸಾವಿರಾರು ಕನ್ನಡಿಗರಿಗೆ ಉದ್ಯೋಗ ನೀಡಿದ್ದು ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ.
ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್, ಹಿದಾಯ ಫೌಂಡೇಶನ್, ಝರಾ ಫ್ಯಾಮಿಲಿ ಚಾರಿಟಿ ಟ್ರಸ್ಟಿನ ಅಧ್ಯಕ್ಷರಾಗಿರುವ ಝಕರಿಯಾ ಜೋಕಟ್ಟೆ ಅವರ ಸೇವೆಯನ್ನು ಗುರುತಿಸಿ ಹಾಗೂ ಉದ್ಯಮ ಕ್ಷೇತ್ರದ ಸಾಧನೆಗಾಗಿ ಹಲವಾರು ಪ್ರಶಸ್ತಿಗಳು ಲಭಿಸಿದೆ. ಪ್ರಸ್ತುತ ಮಂಗಳೂರು ಬೋಳಾರ್ ನಿವಾಸಿಯಾಗಿರುವ ಝಕರಿಯಾ ಜೋಕಟ್ಟೆ, ಪತ್ನಿ ಹಝ್ರ ಝಕರಿಯಾ, ಮೂವರು ಪುತ್ರರಾದ ಝಹೀರ್, ನಝೀರ್ ಮತ್ತು ಝಾಹಿದ್ ಅವರು ವಿದೇಶದಲ್ಲಿ ವಿವಿಧ ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದಾರೆ.





