ಕರಾವಳಿಕ್ರೈಂ

ಮಗುವಿನೊಂದಿಗೆ ಆತ್ಮಹತ್ಯೆಗೆ ಮುಂದಾಗಿದ್ದ ತಂದೆಯನ್ನು ರಕ್ಷಿಸಿದ ಪೊಲೀಸರು

ಮಂಗಳೂರು: ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ರಕ್ಷಿಸಿದ ಘಟನೆ ಸೋಮವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಕೂಳೂರು ಪಂಜಿಮೊಗರು ಅಂಬಿಕಾ ನಗರ ನಿವಾಸಿ ರಾಜೇಶ್ (35) ಮತ್ತವರ ಪುತ್ರಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ ರಾಜೇಶ್ ಕೌಟುಂಬಿಕ ಕಲಹದಿಂದ ಮನನೊಂದು ತನ್ನ ಮಗಳೊಂದಿಗೆ ತಣ್ಣೀರುಬಾವಿ ಬೀಚ್ ಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೆಲ್ಪಿ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು ಎನ್ನಲಾಗಿದೆ.


ಈ ವೀಡಿಯೊವನ್ನು ಗಮನಿಸಿ ಸಾರ್ವಜನಿಕರೊಬ್ಬರು ಪಣಂಬೂರು ಉಪವಿಭಾಗದ ಎಸಿಪಿ ಶ್ರೀಕಾಂತ್ ರಿಗೆ ಕಳುಹಿಸಿದ್ದರು. ವೀಡಿಯೊವನ್ನು ಗಂಭೀರವಾಗಿ ಪರಿಗಣಿಸಿದ ಎಸಿಪಿ ತಕ್ಷಣ ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಆ ವೀಡಿಯೊ ಯಾವ ಬೀಚ್ ನಲ್ಲಿ
ಚಿತ್ರೀಕರಿಸಿದ್ದು ಎಂದು ಆರಂಭದಲ್ಲಿ ಗೊತ್ತಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಎರಡು ತಂಡಗಳಾಗಿ ಪಣಂಬೂರು, ತಣ್ಣೀರುಬಾವಿ ಬೀಚ್ ಗಳಿಗೆ ತೆರಳಿ ಪರಿಶೀಲಿಸಿದ್ದರು. ಈ ವೇಳೆ ತಣ್ಣೀರುಬಾವಿ ಬೀಚ್‌ ನಲ್ಲಿ ಗಂಟೆಯ ಹಿಂದೆ ವೀಡಿಯೊದಲ್ಲಿದ್ದ ತಂದೆ-ಮಗಳನ್ನು ನೋಡಿದ್ದಾಗಿ ಸಾರ್ವಜನಿಕರೊಬ್ಬರು ಮಾಹಿತಿ ನೀಡಿದ್ದರು.


ಆ ಮಾಹಿತಿಯನ್ನು ಆಧರಿಸಿ ವಿಚಾರಿಸಿದಾಗ ಅದು ರಾಜೇಶ್ ಎಂದು ತಿಳಿದು ಬಂದಿತ್ತು. ತಕ್ಷಣ ಅವರ ಮೊಬೈಲ್ ನಂಬರ್ ಕಲೆ ಹಾಕಿ ಕರೆ ಮಾಡಿದಾಗ ಅದು ಸ್ವಿಚ್‌ ಆಫ್‌ ಆಗಿತ್ತು ರಾತ್ರಿ 9:15ರ ಸುಮಾರಿಗೆ ರಾಜೇಶ್ ಮೊಬೈಲ್ ಆನ್ ಆಗಿದೆ ತಕ್ಷಣ ಮೊಬೈಲ್ ಲೊಕೇಶನ್ ಆಧರಿಸಿ ಪಂಜಿಮೊಗರು ಅಂಬಿಕಾ ನಗರದಲ್ಲಿರುವ ಅವರ ಮನೆಗೆ ತೆರಳಿದಾಗ ಬಾಗಿಲು ಮುಚ್ಚಿ ಒಳಗಿನಿಂದ ಚಿಲಕ ಹಾಕಲಾಗಿತ್ತು. ಕಿಟಕಿಯಲ್ಲಿ ನೋಡಿದಾಗ ರಾಜೇಶ್ ಸೀರೆಯಿಂದ ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಳ್ಳುವ ಯತ್ನದಲ್ಲಿದ್ದರು. ತಕ್ಷಣ ಪೊಲೀಸರು ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿ ಅವರನ್ನು ರಕ್ಷಿಸಿದ್ದಾರೆ.

ಮಗುವಿನೊಂದಿಗೆ ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯನ್ನು ಸಕಾಲಿಕ ಕಾರ್ಯಾಚರಣೆ ಮೂಲಕ ರಕ್ಷಿಸಿದ ಪಣಂಬೂರು ಪೊಲೀಸರ ಕಾರ್ಯಕಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ. ಪಣಂಬೂರು ಎಸಿಪಿಯವರಿಂದ ಮಾಹಿತಿ ಬಂದಾಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ತಣ್ಣೀರುಬಾವಿ ಬೀಚ್ ನಲ್ಲಿ ಹುಡುಕಾಡಿದ್ದಾರೆ. ವೀಡಿಯೊದಲ್ಲಿರುವ ವ್ಯಕ್ತಿ ಬೀಚ್ ಗೆ ಬಂದಿರುವ ಮಾಹಿತಿ ಕಲೆ ಹಾಕಿ ಆತನ ಗುರುತು ಪತ್ತೆ ಹಚ್ಚಿದ್ದಾರೆ. ಬಳಿಕ ರಾಜೇಶ್ ಮೊಬೈಲ್ ಸಂಖ್ಯೆ ಕಲೆ ಹಾಕಿ ಸತತ ಪ್ರಯತ್ನದ ಮೂಲಕ ಅವರ ಲೊಕೇಶನ್ ಕಂಡುಹಿಡಿಯುವಲ್ಲಿ ಯಶಸಿಯಾಗಿದ್ದಾರೆ. ತಕ್ಷಣ ಅಲ್ಲಿಗೆ ತೆರಳಿ ತಂದೆ-ಮಗಳ ಜೀವ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಯುವಕನನ್ನು ರಕ್ಷಿಸಿದ ಪಣಂಬೂರು ಪೊಲೀಸರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದ್ದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!