ಕಡಬ: ನದಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ
ಕಡಬ: ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಸೋಮವಾರ ಸಂಜೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಮರ್ಧಾಳದ ಮಂಜು ಎಂಬುವವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ.

ಸೋಮವಾರ ಸಂಜೆ ಐತ್ತೂರು ಗ್ರಾಮದ ಅರಬ್ಬಿ ತೋಡು ಎಂಬಲ್ಲಿ ರಕ್ಷಿತ್ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ರಕ್ಷಿತ್ ಅವರಿಗೆ ಈಜು ತಿಳಿದಿದ್ದರೂ ಸಹ ನೀರಿಗೆ ಇಳಿದಿದ್ದಾರೆ. ಈ ವೇಳೆ ನದಿಯ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆ ನಡೆದ ತಕ್ಷಣ ಸ್ನೇಹಿತರು ಮತ್ತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಕಡಬ ಪೊಲೀಸರು ಮತ್ತು ಪುತ್ತೂರಿನ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ನೆರವಿನೊಂದಿಗೆ ಶೋಧ ಕಾರ್ಯ ಆರಂಭಿಸಿದರು.
ಕತ್ತಲೆಯ ಕಾರಣದಿಂದಾಗಿ ಶೋಧ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ತಡರಾತ್ರಿ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಮತ್ತು ಅವರ ತಂಡ ಸ್ಥಳಕ್ಕೆ ಆಗಮಿಸಿ, ಸುಮಾರು 30 ಅಡಿ ಆಳದಲ್ಲಿ ಸಿಲುಕಿದ್ದ ಮೃತದೇಹವನ್ನು ಹೊರತೆಗೆದಿದ್ದಾರೆ.




