ಕರಾವಳಿ

ಹಿರಿಯ ಸಾಹಿತಿ ಡಾ.ಸಾರಾ ಅಬೂಬಕರ್ ನಿಧನ: ಗಣ್ಯರ ಸಂತಾಪ



ಮಂಗಳೂರು: ಹಿರಿಯ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕರ್(87) ಮಂಗಳವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.

ಮೂಲತಃ ಕಾಸರಗೋಡಿನ ಚಂದ್ರಗಿರಿ ತೀರದವರಾದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು. ‘ಚಂದ್ರಗಿರಿ ತೀರದಲ್ಲಿ‌’ ಕಾದಂಬರಿಯ ಮೂಲಕ ಪ್ರಸಿದ್ಧಿಗೆ ಬಂದಿದ್ದ ಸಾರಾ ಅಬೂಬಕರ್ ಅನೇಕ ಕೃತಿಗಳನ್ನು ರಚಿಸಿ ಖ್ಯಾತರಾಗಿದ್ದರು. ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಮಂಗಳವಾರ ರಾತ್ರಿ ‌8 ಗಂಟೆ ಸುಮಾರಿಗೆ ಮಂಗಳೂರಿನ ಬಂದರ್ ಝೀನತ್ ಬಕ್ಷ್ ಮಸೀದಿ ಆವರಣದ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಹಿಳಾ ಧ್ವನಿಯಾಗಿದ್ದ ಸಾರಾ ಅಬೂಬಕರ್ ಅವರು 1936ರ ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಜನಿಸಿದರು. ನ್ಯಾಯವಾದಿ ಪಿ.ಅಹ್ಮದ್ ಮತ್ತು ಜೈನಾಬಿ ದಂಪತಿಯ ಪುತ್ರಿಯಾಗಿರುವ ಅವರು ಹುಟ್ಟೂರಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದರು. ಕಾಸರಗೋಡಿನಲ್ಲಿ ಹೈಸ್ಕೂಲ್ ಪೂರೈಸಿದ ಸಾರಾ ತನ್ನ ಅಜ್ಜಿ ಹೇಳುತ್ತಿದ್ದ ಕಥೆಗಳಿಂದಾಗಿ ಅವರು ಎಳೆಯದರಲ್ಲೇ ಸಾಹಿತ್ಯ ಕ್ಷೇತ್ರದತ್ತ ಆಕರ್ಷಿತರಾಗಿದ್ದರು. ಇಂಜಿನಿಯರ್ ಆಗಿದ್ದ ಅಬೂಬಕರ್ ಅವರೊಡನೆ ವಿವಾಹವಾದ ಬಳಿಕ ಅವರ ಶಿಕ್ಷಣ ಅರ್ಧದಲ್ಲೇ ಮೊಟಕುಗೊಂಡಿತು.

ಸಾರಾ ಅಬೂಬಕರ್ ಅವರ ಪ್ರಥಮ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಇದು ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತ್ತು.

ಕೃತಿಗಳು: ಸಾರಾ ಅಬೂಬಕರ್ ಸಹನಾ, ವಜ್ರಗಳು, ಕದನವಿರಾಮ, ಸುಳಿಯಲ್ಲಿ ಸಿಕ್ಕವರು, ಪ್ರವಾಹ-ಸುಳಿ ತಳ ಒಡೆದ ದೋಣಿ, ಪಂಜರ, ಇಳಿಜಾರು, ಕಾಣಿಕೆ ಇತ್ಯಾದಿ ಕಾದಂಬರಿಗಳನ್ನು ಅವರು ಬರೆದಿದ್ದಾರೆ. ಚಪ್ಪಲಿಗಳು, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ಖೆಡ್ಡ ಮುಂತಾದ ಕಥಾ ಸಂಕಲನ, ಕಮರಿದ ಕನಸು, ಮಗಳು ಹುಟ್ಟಿದಳು, ತೇಲಾಡುವ ಮೋಡಗಳು, ತಾಳ, ಹೀಗೂ ಒಂದು ಬದುಕು ಮುಂತಾದ ಬಾನುಲಿ ನಾಟಕಗಳನ್ನು ರಚಿಸಿದ್ದಾರೆ. ಲೇಖನ ಗುಚ್ಛ, ಮನೋಮಿ, ಬಲೆ, ನಾನಿನ್ನು ನಿದ್ರಿಸುವೆ ಇತ್ಯಾದಿ ಅನುವಾದಗಳನ್ನು ರಚಿಸಿರುವ ಅವರು, ‘ಐಷಾರಾಮದಲ್ಲಿ’ ಎಂಬ ಪ್ರವಾಸ ಕಥನವನ್ನೂ ಬರೆದಿದ್ದಾರೆ. ಅವರು ಮಲಯಾಳಂನ ಅನೇಕ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

ಸಾರಾ ಅಬೂಬಕ್ಕರ್ ನಿಧನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕ ಬಿ. ಕೆ ಹರಿಪ್ರಸಾದ್ ಸಹಿತ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!