ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಮ್ಮದಿಯಿಂದ ಬದುಕಬೇಕಾದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ:ಬಿ ಕೆ ಹರಿಪ್ರಸಾದ್
ಶಿಕ್ಷಣ ಕ್ಷೇತ್ರದಲ್ಲಿ ದ್ವಿತೀಯ ಪಿಯುಸಿ ಮತ್ತು ಹತ್ತನೆಯ ತರಗತಿ ಫಲಿತಾಂಶಗಳಲ್ಲಿ ಕಳೆದ ಎರಡು ವರ್ಷಗಳ ಮೊದಲು ಪ್ರತಿ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಳ್ಳುತ್ತಿದ್ದರು.
ಇದೀಗ ಕಳೆದು ಎರಡು ವರ್ಷಗಳಿಂದ ಈ ಎರಡು ಫಲಿತಾಂಶಗಳಲ್ಲಿ 13ನೇ ಸ್ಥಾನಕ್ಕೆ ಕುಸಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲ ಕಾರಣ ಬಿಜೆಪಿಯವರ ದ್ವೇಷಪೂರಿತ ರಾಜಕಾರಣದಿಂದಾಗಿ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಮ್ಮದಿಯಿಂದ ಬದುಕಬೇಕಾದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದರು.

ಅವರು ಫೆ.5ರಂದು ಸಂಜೆ ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಳಿ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ ಬಿಜೆಪಿ ವಿರುದ್ಧ ತಮ್ಮದೇ ಶೈಲಿಯಲ್ಲಿ ಟೀಕಾ ಪ್ರಹಾರ ಮಾಡಿದರು. ಮತದಾನ ಸಂದರ್ಭದಲ್ಲಿ ಧರ್ಮ ಜಾತಿ ಭಾಷೆ ಹಣ ಇವೆಲ್ಲವನ್ನು ಮೀರಿ ಮತ ಚಲಾಯಿಸಿ.
ನಿಮ್ಮ ಮಕ್ಕಳ ಭವಿಷ್ಯ ಉಜ್ವಲವಾದರೆ ಇಡೀ ಜಿಲ್ಲೆಯ ಭವಿಷ್ಯವೇ ಉಜ್ವಲವಾಗುತ್ತದೆ ಎಂದು ಅವರು ಹೇಳಿದರು.

ಈ ವೇಳೆ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಸ್ವಾಭಿಮಾನದಿಂದ ಬದುಕುವವರು.ಆದರೆ ಭಾರತೀಯ ಜನತಾ ಪಕ್ಷದವರು ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಸ್ವಾಭಿಮಾನಕ್ಕೆ ಧಕ್ಕೆಯನ್ನು ತಂದಿದ್ದಾರೆ. ಆದ್ದರಿಂದ ಈ ಬಾರಿ ಬಿಜೆಪಿಯವರನ್ನು ಸೋಲಿಸಿ ಮನೆಗೆ ಕಳುಹಿಸಿ ಕಾಂಗ್ರೆಸ್ ಪಕ್ಷದವರು ಅಧಿಕಾರಕ್ಕೆ ತನ್ನಿ ಎಂದು ಕರೆ ನೀಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಸಲೀಂ ಅಹಮದ್ ಮಾತನಾಡಿ ಕಾಂಗ್ರೆಸ್ ಪಕ್ಷ ದೇಶದ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಇರುವ ಪಕ್ಷವಾಗಿದೆ. ಕಾಂಗ್ರೆಸ್ಸಿನಲ್ಲಿ ದ್ವೇಷ ರಾಜಕೀಯ ಎಂದು ಆಗಿಲ್ಲ. ಅದರ ಅವಶ್ಯಕತೆ ಕಾಂಗ್ರೆಸ್ಸಿಗಿಲ್ಲ. ಆದರೆ ಬಿಜೆಪಿಯವರು ದೇಶದ ಜನತೆಯ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಿ ಅದರಿಂದ ಲಾಭ ಪಡೆಯುವವರಾಗಿದ್ದಾರೆ ಎಂದರು.

ಈ ಬಾರಿ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ನಾವು ಈಗಾಗಲೇ ಘೋಷಿಸಿರುವಂತಹ ಎರಡು ಮಹಾಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳ ಬಗ್ಗೆ ಜನರ ಮನೆಯ ಬಾಗಿಲಿಗೆ ತೆರಳಿ ಇದರ ಅರಿವನ್ನು ನೀಡಬೇಕಾಗಿದೆ.
ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆಯನ್ನು ನೀಡುವುದಿಲ್ಲ. ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ ಯೋಜನೆಗಳನ್ನು ಜಾರಿಗೆ ತರುವಂತಹ ಕೆಲಸ ಕಾರ್ಯಗಳನ್ನು ಮಾಡುವ ಪಕ್ಷವಾಗಿದೆ ಎಂದು ಅವರು ಹೇಳಿದರು.
ಮತ್ತೋರ್ವ ಮುಖಂಡ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ರೈತರಿಗೆ ಮತ್ತು ಬಡ ಜನರಿಗೆ ಯಾವುದೆಲ್ಲ ಯೋಜನೆಗಳನ್ನು ತಂದಿದ್ದರು ಎಂಬುವುದು ಎಲ್ಲರಿಗೂ ತಿಳಿದಿರುವಂತಹ ವಿಷಯವಾಗಿದೆ. ಕೃಷಿಕರಿಗೆ ವಿದ್ಯುತ್ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಜೀವನಕ್ಕೆ ಆಧಾರವಾದ ಕಾರ್ಯಗಳನ್ನು ಮಾಡಿದವರು ಎಂದರು.

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಕರಾವಳಿ ಪ್ರಜಾಧ್ವನಿ ಯಾತ್ರೆಯ ಉಸ್ತುವಾರಿ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಪ್ರಸ್ತಾವಿಕ ಮಾತನಾಡಿದರು.
ವೇದಿಕೆಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಮಾಜಿ ಕಾರ್ಯದರ್ಶಿ ಮೋಹನ್ ಪಿ ವಿ, ಯೂಥ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲುಕ್ಮಾನ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿಸಿ ಜಯರಾಮ್, ಮುಖಂಡರುಗಳಾದ ಭರತ್ ಮುಂಡೋಡಿ, ಧನಂಜ ಅಡಪಂಗಾಯ, ಭರತ್ ಮುಂಡೋಡಿ, ಎಚ್ಎಂ ನಂದಕುಮಾರ್, ಜಿ ಕೃಷ್ಣಪ್ಪ, ಡಾl ರಘು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚರ್, ಟಿ ಎಂ ಶಹೀದ್, ಕೆ ಎಮ್ ಮುಸ್ತಫ, ಎಸ್ ಸಂಸುದ್ದಿನ್, ಸಾಹುಲ್ ಹಮೀದ್ ಕುತ್ತಮ್ಮಟ್ಟೆ ಮೊದಲಾದವರು ಉಪಸ್ಥಿತರಿದ್ದರು.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ ವೆಂಕಪ್ಪಗೌಡ ಸ್ವಾಗತಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿಎಸ್ ಗಂಗಾಧರ್ ವಂದಿಸಿದರು.
ಕಾಂಗ್ರೆಸ್ ಸುಳ್ಯ ನಗರ ಅಧ್ಯಕ್ಷ ಎಂ ಜೆ ಶಶಿಧರ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಪ್ರಜಾ ಧ್ವನಿ ಯಾತ್ರೆಯಲ್ಲಿ ನೂರಾರು ಮಂದಿ ಕಾರ್ಯಕರ್ತರು, ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.