ಕರಾವಳಿಕ್ರೈಂ

ಕಡಬ: ಕಾಡಾನೆ ಸೆರೆ ಹಿಡಿದ ಬಳಿಕ ಅಧಿಕಾರಿಗಳ ಮೇಲೆ ಹಲ್ಲೆ, ಕಲ್ಲು ತೂರಾಟ, ವಾಹನಗಳ ಜಖಂಗೊಳಿಸಿದ ಪ್ರಕರಣ: 7 ಮಂದಿ ಆರೋಪಿಗಳ ಬಂಧನ



ಕಡಬ: ಕೊಂಬಾರು ಗ್ರಾಮದ ಮಂಡೆಕರ ಅರಣ್ಯಪ್ರದೇಶದಲ್ಲಿ ಫೆ.23ರಂದು ಸಂಜೆ ಕಾಡಾನೆ ಸೆರೆ ಸಿಕ್ಕಿದ ಬಳಿಕ ನಡೆದ ಬೆಳವಣಿಗೆಯಲ್ಲಿ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.



ಫೆ.23ರಂದು ಕೊಂಬಾರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಕಾಡಾನೆಯು ಸೆರೆಸಿಕ್ಕಿದ್ದು ರಾತ್ರಿ 9 ಗಂಟೆ ವೇಳೆಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಮುಂದಾದಾಗ ಸ್ಥಳದಲ್ಲಿದ್ದ ಕೆಲವು ಜನರು ಸ್ಥಳಕ್ಕೆ ಬಂದು ಕಾಡಾನೆ ತುಂಬಿಸಿದ ಲಾರಿಯನ್ನು ತಡೆದು ನಿಲ್ಲಿಸಿ ಹಿಡಿದಿರುವ ಆನೆಯನ್ನು ಇಲ್ಲಿಯೇ ನಿಲ್ಲಿಸಿ, ಇತರ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ಎಲ್ಲಾ ಆನೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ವಾಗ್ವಾದ ಮಾಡಿದ್ದರು.



ಕಾಡಾನೆಯನ್ನು ಹೆಚ್ಚು ಸಮಯ ಲಾರಿಯಲ್ಲಿ ನಿಲ್ಲಿಸಲು ಆಗುವುದಿಲ್ಲ. ಆದ ಕಾರಣ ನಾವು ಮೊದಲು ಸೆರೆಹಿಡಿದ ಆನೆಯನ್ನು ಬಿಟ್ಟು ಬಂದು ಉಳಿದ ಕಾಡಾನೆಗಳನ್ನು ಸೆರೆಹಿಡಿಯುವುದಾಗಿ ಹೇಳಿದರೂ ಕೇಳದ ಆರೋಪಿಗಳು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. ಗಲಾಟೆಯಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ಜನರಿಗೆ ತಿಳುವಳಿಕೆ ಹೇಳಿದರೂ ಕೇಳದೆ ಆರೋಪಿತರು ಏಕಾಏಕಿ ಸಮವಸ್ತ್ರದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಗೂ ಮತ್ತು ಅರಣ್ಯ ಸಿಬ್ಬಂದಿಯವರಿಗೂ ಕಲ್ಲು ತೂರಾಟ ಮಾಡಿರುತ್ತಾರೆ.

ಕಲ್ಲು ತೂರಾಟದಿಂದ ಅರಣ್ಯ ಇಲಾಖೆ ಯ ಸಿಬ್ಬಂದಿಗಳಿಗೆ ಹಾಗೂ ಪೊಲೀಸರಿಗೂ ಗಾಯಗಳಗಿರುತ್ತದೆ. ಬಳಿಕ ಆರೋಪಿತರು ಸ್ಥಳದಲ್ಲಿ ನಿಲ್ಲಿಸಿದ್ದ ಅರಣ್ಯ ಇಲಾಖಾ ವಾಹನ ಹಾಗೂ ಪೊಲೀಸು ಇಲಾಖಾ ವಾಹನಗಳ ಮೇಲೂ ಕಲ್ಲು ತೂರಾಟ ಮಾಡಿ ವಾಹನಗಳನ್ನು ಜಖಂ ಮಾಡಿರುತ್ತಾರೆ ಎಂದು ಉಪ ವಲಯ ಅರಣ್ಯ ಅಧಿಕಾರಿಯವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ.



ಈ ದೂರಿನ ಅನ್ವಯ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ 7 ಜನ ಆರೋಪಿತರನ್ನು ದಸ್ತಗಿರಿ ಮಾಡಲಾಗಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!