ಲಂಚ ಪ್ರಕರಣ: ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಹೈಕೋರ್ಟ್’ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ಡಿಎಲ್) ಲಂಚ ಪ್ರಕರಣದಲ್ಲಿ ಚನ್ನಗಿರಿಯ ಬಿಜೆಪಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅಲ್ಲದೇ 48 ಗಂಟೆಯಲ್ಲಿ ಶರಣಾಗುವಂತೆ ಸೂಚನೆ ನೀಡಿದೆ.

ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಸಲ್ಲಿಕೆ ಮಾಡಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ನ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ ಮಂಗಳವಾರ ನಡೆಸಿದರು.
ಇಂದು(ಮಾ.7) ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠವು ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ.
ವಿರೂಪಾಕ್ಷಪ್ಪ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ಮಾಡುವಂತೆ ಅವರ ಪರ ವಕೀಲರು ಮನವಿ ಮಾಡಿದ್ದರು.
5 ಲಕ್ಷ ರೂ. ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ಆಧಾರದಲ್ಲಿ ವಿರೂಪಾಕ್ಷಪ್ಪ ಅವರಿಗೆ ಜಾಮೀನು ನೀಡಲಾಗಿದೆ. ಇದೇ 17ಕ್ಕೆ ವಿಚಾರಣೆ ಮುಂದೂಡಲಾಗಿದೆ.





