ಕರಾವಳಿರಾಜ್ಯ

ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯವರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ



ಕಳೆದ ವರ್ಷ ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.

2022 ಜುಲೈ 26ರಂದು ರಾತ್ರಿ ಪ್ರವೀಣ್ ನೆಟ್ಟಾರು ಅವರ ಹತ್ಯೆಯಾಗಿತ್ತು. ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮಾನವೀಯ ನೆಲೆಯಲ್ಲಿ ಮುಖ್ಯ ಮಂತ್ರಿ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ, ದ.ಕ.ಸಂಸದ ನಳಿನ್‌ ಕುಮಾರ್ ಕಟೀಲ್‌ ಅವರು ಭರವಸೆ ನೀಡಿದ್ದರು. ಅದರಂತೆ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ(ಗ್ರೂಪ್ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ 2022ರ ಸೆಪ್ಟೆಂಬರ್ 22ರಂದು ಆದೇಶ ಹೊರಡಿಸಲಾಗಿತ್ತು.ನೂತನ ಕುಮಾರಿ ಅವರ ವಿನಂತಿ ಮೇರೆಗೆ ಅವರಿಗೆ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ನೀಡಲಾಗಿತ್ತು.ಕಳೆದ ಅಕ್ಟೋಬರ್ 14ರಂದು ಅವರು ಕರ್ತವ್ಯಕ್ಕೆ ಹಾಜರಾಗಿದ್ದರು.

ಪ್ರಸಕ್ತ ಮುಖ್ಯಮಂತ್ರಿ ಇರುವ ತನಕ ಇಲ್ಲವೇ ಮುಂದಿನ ಆದೇಶದವರೆಗೆ ಎಂದು ಅವರ ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು ಎನ್ನಲಾಗಿದೆ. ಇದೀಗ ಸರಕಾರ ಬದಲಾಗಿದ್ದು, ನೂತನ ಕುಮಾರಿ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!