ಕರಾವಳಿ

ಜು.23: ನಿಡ್ಪಳ್ಳಿ, ಆರ್ಯಾಪು ಗ್ರಾಮ ಪಂಚಾಯತ್ ಉಪ ಚುನಾವಣೆ- ನಿಷೇಧಾಜ್ಞೆ ಜಾರಿ



ಪುತ್ತೂರು: ತಾಲೂಕಿನ ನಿಡ್ಪಳ್ಳಿ, ಆರ್ಯಾಪು ಸಹಿತ ದ.ಕ ಜಿಲ್ಲೆಯ ಕೆಲ ಗ್ರಾಮ ಪಂಚಾಯತ್‌ಗಳ ಉಪಚುನಾವಣೆ ಜು.23ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಆ ದಿನ ಮತದಾನ ಕೇಂದ್ರಗಳ ನೂರು ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ದ.ಕ.ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಭಾರತೀಯ ದಂಡ ಪ್ರಕ್ರಿಯ ಸಂಹಿತೆ 1973ರ ಸೆಕ್ಷನ್ 144ರನ್ವಯ ಜುಲೈ 23ರ ಬೆಳಗ್ಗೆ 6 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ, ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಮತದಾನ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಆದೇಶಿಸಿದ್ದಾರೆ.

ಪುತ್ತೂರು ತಾಲೂಕು ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರಿಬ್ಬರ ನಿಧನದಿಂದ ತೆರವಾಗಿರುವ ಎರಡು ಸ್ಥಾನಗಳಿಗೆ ಹೊಸದಾಗಿ ಸದಸ್ಯರ ಆಯ್ಕೆಗೆ ಉಪಚುನಾವಣೆ ನಡೆಯಲಿದ್ದು ಕಾಂಗ್ರೆಸ್, ಬಿಜೆಪಿ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.ಎರಡು ಸ್ಥಾನಗಳಿಗೆ ಒಟ್ಟು ಆರು ಮಂದಿ ಅಂತಿಮ ಕಣದಲ್ಲಿದ್ದಾರೆ.

ನಿಡ್ಪಳ್ಳಿ ಗ್ರಾ.ಪಂ.ನ ನಿಡ್ಪಳ್ಳಿ ವಾರ್ಡ್ 2ರ ಸಾಮಾನ್ಯ ಮೀಸಲಾತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಎಂ.ಚಂದ್ರಶೇಖರ ಪ್ರಭು ಗೋಳಿತ್ತಡಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಎನ್. ಸತೀಶ್ ಶೆಟ್ಟಿ ಬಾಕಿತ್ತಿಮಾರ್ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಜಗನ್ನಾಥ ರೈ ಕೊಳಂಬೆತ್ತಿಮಾರ್ ಸ್ಪರ್ಧಿಸುತ್ತಿದ್ದಾರೆ. ಆರ್ಯಾಪು ಗ್ರಾ.ಪಂನ ಆರ್ಯಾಪು ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲಾತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜಗದೀಶ ಭಂಡಾರಿ ಗೆಣಸಿನಕುಮೇರು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಜಿ.ಪುರುಷೋತ್ತಮ ಪ್ರಭು ಅಬ್ಬುಗದ್ದೆ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಸ್ಪರ್ಧಾ ಕಣದಲ್ಲಿದ್ದಾರೆ.

ನಿಡ್ಪಳ್ಳಿ ಗ್ರಾ.ಪಂನ ನಿಡ್ಪಳ್ಳಿ ವಾರ್ಡ್ 2ರ ಸಾಮಾನ್ಯ ಮೀಸಲಾತಿಯಲ್ಲಿ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿ ಚುನಾಯಿತರಾಗಿದ್ದ ಮುರಳಿ ಭಟ್‌ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.ಆರ್ಯಾಪು ಗ್ರಾ.ಪಂನ ಆರ್ಯಾಪು ವಾರ್ಡ್ 2 ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿ ಚುನಾಯಿತರಾಗಿದ್ದ ನಿವೃತ್ತ ಎಸ್.ಐ.ರುಕ್ಮಯ್ಯ ಮೂಲ್ಯ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!